-ಶೌರ್ಯ ಡೆಸ್ಕ್
ಹಿಂದಿನ ಕಾಂಗ್ರೆಸ್ ಸರ್ಕಾರಗಳು ಜನರಿಗೆ ಸದಾ ಮೋಸ ಮಾಡುತ್ತಿದ್ದವು. ಜನರಿಗೆ ನೀಡಿದ್ದ ಭರವಸೆಗಳು ಕೇವಲ ಭರವಸೆಯಾಗಿಯೇ ಉಳಿದವು. ಜನರ ಬಗ್ಗೆ ಚಿಂತಿಸುವ ಮತ್ತು ಜನಪರವಾಗಿ ಕೆಲಸ ಮಾಡುವ ಯೋಚನೆ ಮತ್ತು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಿಲ್ಲ. ಜನರನ್ನು ಮತಬ್ಯಾಂಕಾಗಿ ಬಳಸಿಕೊಳ್ಳುತ್ತಿದ್ದರು ಎಂದು ಆಕ್ಷೇಪಿಸಿದರು.

ಪರಿಶಿಷ್ಟ ಜಾತಿ, ವರ್ಗ, ಬಡವರು, ಮಹಿಳೆಯರು ಸೇರಿದಂತೆ ಸಮಾಜದ ಎಲ್ಲರ ಅಭಿವೃದ್ಧಿಗೆ ಶ್ರಮಿಸುತ್ತಿರುವ “ಸಬ್ ಕಾ ಸಾಥ್ ಸಬ್ ಕಾ ವಿಶ್ವಾಸ್”ಚಿಂತನೆ ಇರುವ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರವನ್ನು ಜನತೆ ಮತ್ತೊಮ್ಮೆ ಆಯ್ಕೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮನವಿ ಮಾಡಿದರು.
ಬಳ್ಳಾರಿಯಲ್ಲಿ ಇಂದು ಬಿಜೆಪಿ ಪರಿಶಿಷ್ಟ ಪಂಗಡಗಳ ಬೃಹತ್ ನವಶಕ್ತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ದಲಿತರು, ಶೋಷಿತರು, ವಂಚಿತರು ಮತ್ತು ಪರಿಶಿಷ್ಟ ವರ್ಗ- ಪಂಗಡ ಸೇರಿದಂತೆ ಎಲ್ಲರಿಗೂ ಅಗತ್ಯ ಸೌಕರ್ಯಗಳನ್ನು ನೀಡುವತ್ತ ಪ್ರಧಾನಿ ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಮತ್ತು ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರಗಳು ಕಾರ್ಯನಿರತವಾಗಿವೆ. ಇದು ನಮ್ಮ ನಿಮ್ಮೆಲ್ಲರ ಸೌಭಾಗ್ಯ ಎಂದು ಅವರು ನುಡಿದರು.

ಹಿಂದಿನ ಕಾಂಗ್ರೆಸ್ ಸರ್ಕಾರಗಳು ಜನರಿಗೆ ಸದಾ ಮೋಸ ಮಾಡುತ್ತಿದ್ದವು. ಜನರಿಗೆ ನೀಡಿದ್ದ ಭರವಸೆಗಳು ಕೇವಲ ಭರವಸೆಯಾಗಿಯೇ ಉಳಿದವು. ಜನರ ಬಗ್ಗೆ ಚಿಂತಿಸುವ ಮತ್ತು ಜನಪರವಾಗಿ ಕೆಲಸ ಮಾಡುವ ಯೋಚನೆ ಮತ್ತು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಿಲ್ಲ. ಜನರನ್ನು ಮತಬ್ಯಾಂಕಾಗಿ ಬಳಸಿಕೊಳ್ಳುತ್ತಿದ್ದರು ಎಂದು ಆಕ್ಷೇಪಿಸಿದರು.
ಕೇಂದ್ರದ ಮೋದಿಜಿ ಸರ್ಕಾರವು ಪೂರ್ಣ ಮನಸ್ಸಿನಿಂದ ಜನರಿಗೆ ವಿವಿಧ ಯೋಜನೆಗಳನ್ನು ನೀಡುತ್ತಿದೆ. ಇಲ್ಲಿನ ಬಸವರಾಜ ಬೊಮ್ಮಾಯಿ ಸರ್ಕಾರವೂ ಜನಪರವಾಗಿದೆ. ಮೀಸಲಾತಿ ಹೆಚ್ಚಳದ ಮೂಲಕ ಅದು ಪರಿಶಿಷ್ಟ ಜಾತಿ- ಪಂಗಡದವರಿಗೆ ಸಾಮಾಜಿಕ ನ್ಯಾಯ ನೀಡಿದೆ. ಸದಾ ಜನೋಪಯೋಗಿಯಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಮೋದಿಜಿ ಅವರ ನೇತೃತ್ವದ ಅವಧಿಯಲ್ಲಿ ಆದಿವಾಸಿ ಮಹಿಳೆಯು ದೇಶದ ರಾಷ್ಟ್ರಪತಿಯಾಗಿದ್ದಾರೆ. ಈ ಮೂಲಕ ಅವರು ಆದಿವಾಸಿಗಳಿಗೆ ಗೌರವಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದ ಅವರು, ಹಲವು ದಶಕಗಳ ಕಾಲ ಕೆಲಸ ಮಾಡಿದ್ದ ಕಾಂಗ್ರೆಸ್ ಪಕ್ಷವು ಆದಿವಾಸಿಗಳನ್ನೇಕೆ ನೆನಪು ಮಾಡಿಕೊಳ್ಳಲಿಲ್ಲ ಎಂದು ಅವರು ಪ್ರಶ್ನಿಸಿದರು.
ಆದಿವಾಸಿ ಜನಾಂಗಕ್ಕೆ ಗರಿಷ್ಠ ಸ್ಥಾನಮಾನಗಳನ್ನು ನಮ್ಮ ಪಕ್ಷ ನೀಡಿದೆ. ಮುಖ್ಯಮಂತ್ರಿ, ಗವರ್ನರ್ ಸೇರಿದಂತೆ ವಿವಿಧ ಹುದ್ದೆಗಳ ಪ್ರಶ್ನೆ ಬಂದಾಗ ನಾವು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ- ವರ್ಗಕ್ಕೆ ಆದ್ಯತೆ ಕೊಟ್ಟಿದ್ದೇವೆ. ಇದನ್ನು ಜನರು ಗಮನಿಸಬೇಕು ಎಂದು ಮನವಿ ಮಾಡಿದರು.
ಭಗವಾನ್ ಬಿರ್ಸಾ ಮುಂಡಾ ಅವರ ಜನಜಾತಿ ಗೌರವ ದಿವಸ್ ಆಚರಣೆಗೆ ಬಿಜೆಪಿ ಮುಂದಾಗಿದೆ. ಆದರೆ ಕಾಂಗ್ರೆಸ್ ಪಕ್ಷವು ಯಾಕೆ ಅದನ್ನು ಮಾಡಿಲ್ಲ ಎಂದು ಆಕ್ಷೇಪಿಸಿದ ಅವರು, ಕಾಂಗ್ರೆಸ್ಸಿಗರು ಈ ಜನಾಂಗವನ್ನು ಕೇವಲ ಮತಬ್ಯಾಂಕಾಗಿ ಬಳಸಿಕೊಂಡಿದೆ ಎಂದು ಟೀಕಿಸಿದರು.

ಕೇಂದ್ರ ಸಚಿವ ಅರ್ಜುನ್ ಮುಂಡಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಸಚಿವ ಶ್ರೀರಾಮುಲು, ಕೇಂದ್ರ-ರಾಜ್ಯದ ಸಚಿವರು, ಸಂಸದರು, ಶಾಸಕರು, ಪಕ್ಷದ ಮುಖಂಡರು, ಎಸ್.ಟಿ. ಸಮುದಾಯದ ಲಕ್ಷಾಂತರ ಕಾರ್ಯಕರ್ತರು ಮತ್ತು ಪಕ್ಷದ ಅಭಿಮಾನಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.