19.8 C
Bengaluru
Tuesday, March 21, 2023
spot_img

2ಎ ಮೀಸಲಾತಿ ಬದಲಿಸಲು ಹೊರಟರೆ ಉಗ್ರ ಹೋರಾಟ: ಕ್ಷತ್ರಿಯರ ಎಚ್ಚರಿಕೆ

ಪಂಚಮಸಾಲಿ, ವೀರಶೈವ ಲಿಂಗಾಯತರ ಬೇಡಿಕೆಗೆ ಸರ್ಕಾರ ಮಣಿದರೆ ಸುಮ್ಮನಿರಲ್ಲ: ಉದಯ್ ಸಿಂಗ್

ಪ್ರೆಸ್ ಕ್ಲಬ್ ನಲ್ಲಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ರಾಜ್ಯಾಧ್ಯಕ್ಷರಾದ ಉದಯ್ ಸಿಂಗ್ ನೇತೃತ್ವದಲ್ಲಿ ನಡೆದ ಮಾಧ್ಯಮಗೋಷ್ಠಿ ನಡೆಯಿತು. ಮಹಿಳಾ ಘಟಕ ರಾಜ್ಯಾಧ್ಯಕ್ಷರಾದ ಉಮಾಮೂರ್ತಿ ರಾವ್, ಬೆಂಗಳೂರು ನಗರ ಅಧ್ಯಕ್ಷರಾದ ಆರ್. ಜಗದೀಶ್, ಸಂಘಟನಾ ಕಾರ್ಯದರ್ಶಿ ಹರಿಶಂಕರ್ , ರಾಜ್ಯ ಉಪಾಧ್ಯಕ್ಷರಾದ ರಾಮಚಂದ್ರಪ್ಪ ಮತ್ತಿತರಿದ್ದರು.

-ಶೌರ್ಯ ಡೆಸ್ಕ್

ಪಂಚಮಸಾಲಿ, ವೀರಶೈವ ಲಿಂಗಾಯತ ಸಮಾಜದ ೨ಎ ಮೀಸಲಾತಿ ಬೇಡಿಕೆ ಪ್ರಸ್ತಾವನೆ ವಿರುದ್ಧ ರಾಜ್ಯದ ಕ್ಷತ್ರಿಯ ಸಮುದಾಯ ಸಿಡಿದೆದ್ದಿದೆ. ಸರ್ಕಾರ ಇವರ ಒತ್ತಾಯಕ್ಕೆ ಮಣಿದು ಮೀಸಲಾತಿ ವ್ಯವಸ್ಥೆ ಬದಲಿಸಿ ಹದಗೆಡಿಸಲು ಹೊರಟರೆ ಸುಮ್ಮನೆ ಇರುವುದಿಲ್ಲ.  ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ. 2ಎ ಪ್ರವರ್ಗದಲ್ಲಿರುವ ಅತಿ ಹಿಂದುಳಿದ 102 ಸಮುದಾಯಗಳ ಜೊತೆಗೂಡಿ ತಕ್ಕ ಪಾಠ ಕಲಿಸುತ್ತೇವೆ ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪಂಚಮಸಾಲಿಗಳು ಸೇರಿ ವೀರಶೈವ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು ಇದು ಅತಿಹಿಂದುಳಿದ ವರ್ಗಗಳಿಗೆ ಮಾಡುವ ಘೋರ ಅನ್ಯಾಯವಾಗಿದೆ. ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಕೇವಲ ವೀರಶೈವ ಲಿಂಗಾಯತ ಪಂಚಮಸಾಲಿಗಳನ್ನು ಓಲೈಸಲು ಹೊರಟಿದ್ದು ಆ ಸಮುದಾಯಕ್ಕೆ ಶೇ.15 ರಷ್ಟು ಮೀಸಲಾತಿ ದೊರಕಿಸಿಕೊಡಲು ಹೊರಟರೆ ಪ್ರಸ್ತುತ ಪ್ರವರ್ಗ 2ಎ ಪಟ್ಟಿಯಲ್ಲಿರುವ 102ಕ್ಕೂ ಹೆಚ್ಚು ಜಾತಿಗಳು ಮೀಸಲಾತಿಯಿಂದ ವಂಚಿತವಾಗುತ್ತವೆ. ಬಲಿಷ್ಠ ಸಮಾಜಕ್ಕೆ ಪೂರ್ತಿ ಮೀಸಲಾತಿ ಸವಲತ್ತು ದೊರೆತು ಸಣ್ಣ ಅತಿಸಣ್ಣ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ಸಿಗಬೇಕೆಂಬ ಮೀಸಲಾತಿಯ ಸಾಂವಿಧಾನಿಕ ಆಶಯವೇ ಮಣ್ಣು ಪಾಲಾಗಲಿದೆ. ಇದನ್ನು ಖಂಡಿಸಿ ಕರ್ನಾಟಕ ಕ್ಷತ್ರಿಯ ಒಕ್ಕೂಟ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ ಎಂದರು.

ಅವರ ಪತ್ರಿಕಾಗೋಷ್ಟಿಯ ಮುಖ್ಯಾಂಶಗಳು ಕೆಳಕಂಡಂತಿವೆ.

* ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಪ್ರಬಲವಾಗಿರುವ ಪಂಚಮಸಾಲಿ ಸೇರಿ ವೀರಶೈವ ಲಿಂಗಾಯತ ಸಮುದಾಯ ಮತ್ತು ಅದರೊಳಗಿನ ಉಪಜಾತಿಗಳನ್ನು 2ಎ ಪಟ್ಟಿಗೆ ಸೇರ್ಪಡೆ ಮಾಡಿದರೆ ಪ್ರವರ್ಗ 2ಎ ಮೀಸಲಾತಿ ಪಟ್ಟಿಯಲ್ಲಿರುವ ಕ್ಷತ್ರಿಯ ಜನಾಂಗ ಮತ್ತು ನಮ್ಮ ಉಪಜಾತಿಗಳು ಸೇರಿ ಅತಿ ಹಿಂದುಳಿದ 102ಕ್ಕೂ ಹೆಚ್ಚು ಜಾತಿಗಳಿಗೆ ಅನ್ಯಾಯವಾಗುತ್ತದೆ. ಇದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು ನಾವು ಸಹಿಸಲು ಸಾಧ್ಯವಿಲ್ಲ.

* ವೀರಶೈವ-ಲಿಂಗಾಯತ-ಪಂಚಮಸಾಲಿ ಸಮುದಾಯ ಒಂದೇ ಜಾತಿಯಾಗಿ ಗುರುತಿಸಿಕೊಂಡಿರುವುದು ಮತ್ತು ರಾಜ್ಯದ ರಾಜಕೀಯ, ಶಿಕ್ಷಣ, ಉದ್ಯಮ ಎಲ್ಲಾ ವಲಯದಲ್ಲಿ ಪ್ರಬಲವಾಗಿ ಬೆಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಸ್ವಾತಂತ್ರ್ಯ ಬಂದಾಗಿನಿಂದ ಈವರೆಗೂ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯವೇ ಬಹುತೇಕ ರಾಜ್ಯ ರಾಜಕಾರಣವನ್ನು ನಿಯಂತ್ರಿಸುತ್ತ ಬಂದಿದೆ. ಶೇ.50ಕ್ಕೂ ಹೆಚ್ಚು ರಾಜಕೀಯ ಪಾಲು ಈ ಸಮುದಾಯ ಪಡೆದಿದೆ. ಹತ್ತಾರು ಮಠಗಳು ಸರ್ಕಾರದಿಂದ ದೊಡ್ಡ ಪ್ರಯೋಜನ ಪಡೆಯುತ್ತಾ ಬಂದಿವೆ. ಪ್ರತಿವರ್ಷ ಈಗಲೂ ನೂರಾರು ಕೋಟಿ ಅನುದಾನ ಪಡೆಯುತ್ತಿವೆ. ಲಿಂಗಾಯತ ಸಮುದಾಯದ ಜನಪ್ರತಿನಿಧಿಗಳು ಶೇ. 25ಕ್ಕೂ ಹೆಚ್ಚು ಮಂದಿ ವಿಧಾನಸಭೆಗೆ ಆಯ್ಕೆ ಆಗುತ್ತಿದ್ದಾರೆ ( 2018ರಲ್ಲಿ 58 ಶಾಸಕರು). ವಿಧಾನಪರಿಷತ್, ಲೋಕಸಭೆಗೂ ರಾಜ್ಯದಿಂದ ಅತಿ ಹೆಚ್ಚು ಅದೇ ಸಮುದಾಯ ಆಯ್ಕೆ ಆಗುತ್ತಿದೆ. ರಾಜ್ಯದ ಪ್ರಬಲ ಭೂಮಾಲೀಕತ್ವವೂ ಅದೇ ಸಮುದಾಯದವರ ಕೈನಲ್ಲಿದೆ. ಬೃಹತ್ ಉದ್ಯಮಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಉದ್ಯೋಗ, ಆಡಳಿತರಂಗ ಹೀಗೆ ಲಿಂಗಾಯತ ಸಮುದಾಯ ಮತ್ತು ಅದರ ಉಪಜಾತಿಗಳು ಎಲ್ಲಾ ವಲಯದಲ್ಲಿ ಸಿಂಹಪಾಲು ಹೊಂದಿವೆ. ಇದರಿಂದ ಆ ಸಮಾಜ ಸಹಜವಾಗಿಯೇ ಬಲಿಷ್ಠವಾಗಿದೆ. ಹೀಗಿದ್ದಾಗ್ಯೂ ಅತೀ ಹಿಂದುಳಿದ ಸಮುದಾಯ ಎಂದು ಹೇಳಿಕೊಳ್ಳುವುದು ಅರ್ಥಹೀನವಾಗಿದೆ. ಮತ ಬ್ಯಾಂಕ್‌ಗಾಗಿ ಬಿಜೆಪಿ ಸೇರಿ ರಾಜಕೀಯ ಪಕ್ಷಗಳು ಪಂಚಮಸಾಲಿ ಮತ್ತು ವೀರಶೈವ ಲಿಂಗಾಯತರ 2ಎ ಪ್ರಸ್ತಾವನೆಗೆ ಕುಮ್ಮಕ್ಕು ನೀಡುತ್ತಿರುವುದು ಅತಿ ಹಿಂದುಳಿದ ವರ್ಗಗಳು ದಮನ ಮಾಡಲು ಪ್ರಯತ್ನಿಸಿದಂತೆಯೇ ಸರಿ.

* ಬಲಿಷ್ಠವಾಗಿ ಬೆಳೆದು ರಾಜ್ಯದ ಮೇಲ್ವರ್ಗವಾಗಿ ಗುರುತಿಸಿಕೊಂಡರೂ ಪ್ರವರ್ಗ `2ಎ’ ಗೆ ಸೇರಲು ಹವಣಿಸುತ್ತಿರುವುದು ಆ ಪ್ರವರ್ಗಕ್ಕೆ ಮೀಸಲಿರುವ ಶೇ.15 ರಷ್ಟು ಮೀಸಲು ಕಬಳಿಸಲು ಎಂಬುದು ಎಂತವರಿಗಾದರೂ ಅರ್ಥವಾಗುವಂತದ್ದಾಗಿದ್ದು ಇದಕ್ಕೆ ಬಿಜೆಪಿ ಪ್ರೋತ್ಸಾಹ ನೀಡುತ್ತಿರುವುದು ಅತಿ ಹಿಂದುಳಿದ ವರ್ಗಗಳಿಗೆ ಧ್ವನಿ ಇಲ್ಲದ ಸಮುದಾಯಗಳಿಗೆ ವಂಚನೆ ಮಾಡುವ ಧೋರಣೆಯಾಗಿದೆ.

* ಪ್ರವರ್ಗ 2ಎ ಪಟ್ಟಿಯಲ್ಲಿರುವ 102 ಜಾತಿಗಳ ಪೈಕಿ ಬೆರಣಿಕೆಯಷ್ಟು ಸಮುದಾಯಗಳು ಬಿಟ್ಟು ಇತರೆ ಯಾವುದೇ ಸಮುದಾಯ ಈವರೆಗೂ ನ್ಯಾಯಬದ್ಧ ಹಕ್ಕು ಪಡೆದುಕೊಂಡಿಲ್ಲ. ಅನೇಕ ಸಣ್ಣ ಅತಿ ಸಣ್ಣ ಸಮುದಾಯಗಳು ಇಂದಿಗೂ ನಿಕೃಷ್ಣ ಸ್ಥಿತಿಯಲ್ಲಿ ಬದುಕುತ್ತಿವೆ. ಶಿಕ್ಷಣ, ಉದ್ಯೋಗ, ಆರ್ಥಿಕ ಮತ್ತು ಸಾಮಾಜಿಕವಾಗಿ ಸುಧಾರಣೆಯಾಗದೆ ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದಿವೆ. ಕುಂಬಾರ, ಮಡಿವಾಳ, ಸವಿತಾ, ಗಾಣಿಗ, ಹಳೆಪೈಕ, ದೇವಾಂಗ ಇಂತಹ ಸಮಾಜಗಳಲ್ಲದೆ ಕ್ಷತ್ರಿಯ ಸಮುದಾಯದ ರಾಮ ಕ್ಷತ್ರಿಯ, ಕೋಟೆ ಕ್ಷತ್ರಿಯ, ಸೋಮವಂಶ ಕ್ಷತ್ರಿಯ, ರಾಜು ಕ್ಷತ್ರಿಯ, ಕುಮಾರ ಕ್ಷತ್ರಿಯ, ಕುಮಾರ ಪಂತ್ ಕ್ಷತ್ರಿಯ, ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ, ಭಾವಸಾರ ಕ್ಷತ್ರಿಯ, ವಹ್ನಿಕುಲ ಕ್ಷತ್ರಿಯ, ಅಗ್ನಿಕುಲ ಕ್ಷತ್ರಿಯ, ಶಂಭುಕುಲ ಕ್ಷತ್ರಿಯ, ತಿಗಳ, ನಯನಜ ಕ್ಷತ್ರಿಯ ಹೀಗೆ ಅನೇಕ ಜಾತಿಗಳು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲವಾಗಿವೆ. ಪಂಚಮಸಾಲಿಗಳನ್ನು ಮತ್ತು ಲಿಂಗಾಯತರನ್ನು ಪ್ರವರ್ಗ 2ಎಗೆ ಸೇರಿಸಿದರೆ ಈ ಸಮುದಾಯಗಳಿಗೆ ಮೀಸಲಾತಿ ಬಾಗಿಲು ಸಂಪೂರ್ಣ ಮುಚ್ಚಿ ಹೋಗುತ್ತದೆ.

* ಪ್ರಬಲ ಸಮುದಾಯ 2ಎ ಪಟ್ಟಿಯಲ್ಲಿರುವ ನಮ್ಮ ಪಾಲನ್ನು ಕಬಳಿಸಲು ಬಂದರೆ ನಾವೆಲ್ಲಿ ಹೋಗಬೇಕು? ಪರ್ಯಾಯ ವ್ಯವಸ್ಥೆ ಆಗದೆ ಬಲಿಷ್ಠ ಸಮಾಜವನ್ನು ದುರ್ಬಲ ಸಮುದಾಯಗಳ ನಡುವೆ ತಂದು ಬಿಟ್ಟರೆ ನಾವು ಉಳಿಯುವುದು ಸಾಧ್ಯವೇ? ಇದನ್ನು ಒಪ್ಪಲು ಎಂದಿಗೂ ಸಾಧ್ಯವಿಲ್ಲ.

* ಬಿಜೆಪಿ ಸಮಸ್ತ ಹಿಂದುಗಳ ಹೆಸರಿನಲ್ಲಿ ಹಿಂದುತ್ವದ ಮೂಲಕ ಅಧಿಕಾರಕ್ಕೆ ಬಂದಿದೆಯೇ ಹೊರತು ಕೇವಲ ಲಿಂಗಾಯತರಿಂದಲ್ಲ. ಕೇವಲ ಲಿಂಗಾಯತ ಪಕ್ಷ ಅನ್ನುವುದಾದರೆ ಅದನ್ನು ಬಹಿರಂಗವಾಗಿ ಘೋಷಣೆ ಮಾಡಲಿ ಇಲ್ಲವೇ  2ಎ ಮೀಸಲಾತಿ ಪ್ರಸ್ತಾವನೆಗೆ ಉತ್ತೇಜನ ಮಾಡುವುದನ್ನು ಬಿಡಲಿ. ಅವೈಜ್ಞಾನಿಕ ಅಂಶಗಳನ್ನು ಮುಂದಿಟ್ಟುಕೊಂಡು ಲಿಂಗಾಯತ ಒಳಪಂಗಡಗಳು ಹಿಂದುಳಿದಿವೆ ಎಂದರೆ ಅದಕ್ಕೆ ಕಿಮ್ಮತ್ತಿಲ್ಲ.

* ಪಂಚಮಸಾಲಿಗಳು ಮತ್ತು ಸಮಸ್ತ ಲಿಂಗಾಯತರು ವೀರಶೈವ ಲಿಂಗಾಯತರ ಹೆಸರಿನಲ್ಲಿ 3ಬಿ ಪ್ರವರ್ಗದಲ್ಲಿರುವುದು ಸಮಂಜಸವಾಗಿದೆ.  ಅತೀ ಹಿಂದುಳಿದ ವರ್ಗಗಳ ಪಾಲು ಕಸಿದುಕೊಂಡು ಹೆಚ್ಚು ಹೆಚ್ಚು ಮೀಸಲಾತಿ ಪ್ರಯೋಜನ ಪಡೆಯಲು 2ಎ ಪ್ರವರ್ಗದ ಶೇ.15ರ ಮೀಸಲಾತಿ ಮೇಲೆ ಕಣ್ಣು ಹಾಕಿದರೆ ದುರ್ಬಲ ವ್ಯಕ್ತಿಯ ಅನ್ನ ಕಸಿದಂತೆಯೇ ಸರಿ. ದುರ್ಬಲರನ್ನು ಮೇಲೆತ್ತುವುದರ ಬದಲು ಸರ್ಕಾರ ಅವರನ್ನು ತುಳಿಯಲು ಹೊರಟರೆ ಅಮಾನವೀಯವಾಗುತ್ತದೆ.

* 2ಎ ಪ್ರವರ್ಗಕ್ಕೆ ಲಿಂಗಾಯತ ಒಳಪಂಗಡಗಳನ್ನು ಸೇರಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವೇ ಇಲ್ಲ. ಹೀಗಾಗಿ ಇದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಈ ಸಂಬಂಧ ಕರ್ನಾಟಕ ಕ್ಷತ್ರಿಯ ಒಕ್ಕೂಟ ರಾಜ್ಯವ್ಯಾಪಿ ಹೋರಾಟ ಕೈಗೆತ್ತಿಕೊಳ್ಳಲಿದೆ. ಘನತೆವೆತ್ತ ರಾಜ್ಯಪಾಲರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಲು ನಿರ್ಧರಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

14FansLike
35FollowersFollow
47FollowersFollow
- Advertisement -spot_img

Latest Articles